|
ಮುಖಪುಟ
/ನಮ್ಮ
ದೇವಾಲಯಗಳು ದೇವರಾಯನ ದುರ್ಗದ ಕುಂಭಿ ನರಸಿಂಹ *ಟಿ.ಎಂ.ಸತೀಶ್
ಐತಿಹ್ಯ : ಹೊಯ್ಸಳರ ಕಾಲದಲ್ಲಿ ಬೆಟ್ಟದ ಮೇಲೆ ಆನೆ ಬಿದ್ದಸರಿ (ಆನೆ ಬಿದ್ದ ಝರಿ) ಎಂಬ ಹೆಸರಿನ ಊರಿತ್ತು ಎನ್ನುತ್ತದೆ ಇತಿಹಾಸ. ವಿಜಯನಗರದ ಅರಸರ ಕಾಲದಲ್ಲಿ ಬೆಟ್ಟ ದುರ್ಗಕ್ಕೆ ಕರಿಗಿರಿ ಎಂಬ ಹೆಸರು ಪಡೆಯಿತು. 1696ರಲ್ಲಿ ಚಿಕ್ಕದೇವರಾಯ ಒಡೆಯರು ಕೋಟೆಯನ್ನು ವಶಪಡಿಸಿಕೊಂಡ ಮೇಲೆ ಇದಕ್ಕೆ ದೇವರಾಯನದುರ್ಗ ಎಂಬ ಹೆಸರು ಬಂತು. ಮಲ್ಲಪಟ್ಟಣ ಎಂದೂ ಕರೆಸಿಕೊಂಡಿದ್ದ ದೇವರಾಯನ ದುರ್ಗದಲ್ಲಿ ಮೊದಲನೇ ಕಂಠೀರವ ನರಸರಾಜ ಒಡೆಯರು ದುರ್ಗಾನರಸಿಂಹ ದೇವಾಲಯ ಕಟ್ಟಿಸಿದ್ದಾರೆ. ಕುಂಬಿ ಬೆಟ್ಟಕ್ಕೆ ಹೋಗುವಾಗ ಮೈಸೂರು ಅರಸರ ಕಾಲದ ಕೋಟೆಯ ಪಳೆಯುಳಿಕೆಗಳು ಗೋಚರಿಸುತ್ತವೆ. ಬೆಟ್ಟದ ಮೇಲೆ ಇರುವ ಸುಂದರ ದೇವಾಲಯ ದ್ರಾವಿಡ ಶೈಲಿಯಲ್ಲಿದೆ. ಊರಿನ ಈಶಾನ್ಯ ದಿಕ್ಕಿನಲ್ಲಿರುವ ಕುಂಭಿಬೆಟ್ಟವಿದೆ. ಬೆಟ್ಟದ ಬಲಕ್ಕೆ ತಿರುಗಿದರೆ ಬಿಲ್ಲಿನ ದೋಣೆ, ಸೀತಾದೇವಿ ಕೊಳ ಹಾಗೂ ರಾಮಲಕ್ಷ್ಮಣರು ತಪವನ್ನಾಚರಿಸಿದ ಗುಹೆ ಇದೆ. ಈ ಗುಹೆಯಲ್ಲಿ ರಾಮ, ಸೀತೆ ಮತ್ತು ಲಕ್ಷ್ಮಣರ ವಿಗ್ರಹಗಳಿವೆ ಪಕ್ಕದಲ್ಲಿಯೇ ಬ್ರಿಟಿಷರ ಕಾಲದ ಬಂಗ್ಲೆ ಇರುವ ಬಂಗ್ಲೆ ಬೆಟ್ಟ ನೋಡಬಹುದು. ತುಮಕೂರಿನಿಂದ ಉರುಡಗೆರೆ ಮಾರ್ಗವಾಗಿ ಕ್ಷೇತ್ರಕ್ಕೆ ಬಂದರೆ ಮೊದಲು ನಾಮದ ಚಿಲುಮೆ ಸಿಗುತ್ತದೆ. ಅಲ್ಲಿಂದ ಮುಂದೆ ಸಾಗುತ್ತಿದ್ದಂತೆ ಜಯಮಂಗಲಿ ನದಿಯ ತಟದಲ್ಲಿ ಕಾಳಿಕಾಗುಡಿ ಇದೆ. ಮುಂದೆ ನರಸಿಂಹನ ದೇವಾಲಯವಿದೆ. ಪಕ್ಕದಲ್ಲೇ ಮೂರ್ಚಿತನಾಗಿದ್ದ ಲಕ್ಷ್ಮಣನ ರಕ್ಷಿಸಲು ಸಂಜೀವಿನಿ ಪರ್ವತವನ್ನೇ ಕಿತ್ತುತಂದ ಹನುಮ ಸಂಜೀವರಾಯನ ದೇವಾಲಯವಿದೆ. ಕ್ಷೇತ್ರದಲ್ಲಿ ರಾಮತೀರ್ಥ, ಧನುಷ್ ತೀರ್ಥ ಎಂಬ ಎರಡೂ ದೊಣೆಗಳೂ ಇವೆ. ತಳಬೆಟ್ಟದಿಂದ 2 ಕಿಲೋ ಮೀಟರ್ ಮೇಲಿರುವ ಕುಂಬಿ ಬೆಟ್ಟದ ಮೇಲೆ ಕುಂಬೀನರಸಿಂಹನ ದೇವಸ್ಥಾನವಿದೆ.
ಇಲ್ಲಿರುವ ದೇವಾಲಯದಲ್ಲಿ ಗರ್ಭಗೃಹ, ಸುಖನಾಸಿ, ನವರಂಗ ಮತ್ತು ಮುಖಮಂಟಪವಿದೆ. ಇಲ್ಲಿ ನರಸಿಂಹತೀರ್ಥ, ಪಾದ ತೀರ್ಥ, ಪರಾಶರತೀರ್ಥ ಇದೆ. ದಾಸಶ್ರೇಷ್ಠ ಪುರಂದರದಾಸರು ಕ್ಷೇತ್ರಕ್ಕೆ ಭೇಟಿ ನೀಡಿ, ಕರಿಗಿರಿ ನರಸಿಂಹ ಭಕ್ತರ ದಂತಿಸಿಂಹ ಪರಿಪಾಲಿಸು ಮೊರೆಹೊಕ್ಕೆನು ನಾನು ವರದಪುರಂದರ ವಿಠಲ ಎಂದು ಹಾಡಿದ್ದಾರೆ. ಸಂಪರ್ಕ: ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಖನಿಜ ಭವನ, ರೇಸ್ಕೋರ್ಸ್ ರಸ್ತೆ, ಬೆಂಗಳೂರು. ದೂರವಾಣಿ :080-22352901 /22352909 /22352903 Email : kstdc@vsnl.in | |||